ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ವಿಪತ್ತು ನಿರ್ವಹಣೆಯ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಒಂದು ವಾರದಿಂದ ರಾಜ್ಯದಲ್ಲಿ ಬೆಳೆ ಸಮೀಕ್ಷೆ ಮಾಡಲಾಗಿದ್ದು, ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ನಿಂತು ಹೋಗಿವೆ ಎಂದು ತಿಳಿಸಿದರು. ಕೇಂದ್ರದ ಮಾರ್ಗಸೂಚಿ ಪ್ರಕಾರ 161 ತಾಲೂಕುಗಳು ಬರಪೀಡಿತ ಪಟ್ಟಿಗೆ ಅರ್ಹವಾಗಿದ್ದರು ಕೂಡ, ಇನ್ನುಳಿದ 34 ತಾಲೂಕುಗಳಲ್ಲಿ ಪರಿಸ್ಥಿತಿ ಭಿನ್ನವಿಲ್ಲ ಎಂದು ತಿಳಿಸಿದರು.
ವಿಪತ್ತು ನಿರ್ವಹಣೆ ಸಂಪುಟ ಉಪ ಸಮಿತಿ ಮಾಡಿರುವ ಶಿಫಾರಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿತ ಹಾಕಿದ ನಂತರ ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆಯಾಗಲಿದೆ. ಬರ ಘೋಷಣೆಯಾದ ನಂತರ ಪೀಡಿತ ತಾಲೂಕುಗಳಲ್ಲಿ ಕಾರ್ಯಪಡೆಗಳನ್ನು ರಚಿಸಲಾಗುವುದು. ಕುಡಿಯುವ ನೀರು ಪೂರೈಸಲು ಟ್ಯಾಂಕರ್ ವ್ಯವಸ್ಥೆ ಮಾಡಲು ಮತ್ತು ಬೋರ್ವೆಲ್ಗಳನ್ನು ಕೊರೆಸಲು ನೀಡಲು ಹಣ ನೀಡಲಾಗುವುದು ಎಂದು ಗೌಡ ಹೇಳಿದರು. ರೈತರಿಗೆ ಉಚಿತ ಮೇವು ಮತ್ತು ಬೀಜಗಳನ್ನು ನೀಡಲಾಗುವುದು, ಇದಕ್ಕಾಗಿ 20 ಕೋಟಿ ರೂ ಮಂಜೂರು ಮಾಡಿದೆ.