ನಾಳೆಯಿಂದ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು, ಮೂಡಾ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ.
ಅಧಿವೇಶನದಲ್ಲಿ ಮೂಡಾ ವಿಷಯ ಇಟ್ಟುಕೊಂಡು ಹಂಗಾಮಾ ನಡೆಸಲು ಸಜ್ಜಾಗಿದ್ದ ವಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೂಡಿದ್ದಾರೆ. ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ಆದೇಶಿಸಿದೆ. ಆದೇಶ ಹೀಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಈ ಕುರಿತು ದಿನ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ.
ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.
ಈ ಹಿನ್ನಲೆಯಲ್ಲಿ ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು Commission of Inquiry Act 1952ರ ನಿಯಮ 3ರ ಉಪನಿಯಮ (1)ರನ್ವಯ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ.ಎನ್.ದೇಸಾಯಿ, ರವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ.
Commissions of Inquiry Act, 1952 are Code of Civi Procedure ರಲ್ಲಿನ ಅವಕಾಶದಡಿ ವಿಚಾರಣೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ ಹಾಗೂ ತನಿಖೆಯನ್ನು 06 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದ್ದೆಂದು ಸರ್ಕಾರವು ಅಪೇಕ್ಷಿಸುತ್ತದೆ.
ವಿಚಾರಣಾ ಆಯೋಗದ Terms of Reference ಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಹೇಳಿದೆ.
ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ/ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು/ಆರ್ಥಿಕ ಸಲಹೆಗಾರರು/ ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸಹಕರಿಸತಕ್ಕದ್ದು ಎಂದು ಆದೇಶದಲ್ಲಿ ಹೇಳಲಾಗಿದೆ.
ವಿಚಾರಣೆ ಆಯೋಗಕ್ಕೆ ಸಂಬಂಧಪಟ್ಟಂತೆ ನಗರಾಭಿವೃದ್ಧಿ ಇಲಾಖೆಯ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ವಿಚಾರಣೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು/ ದಾಖಲಾತಿಗಳು/ ಇತ್ಯಾದಿಗಳನ್ನು ಒದಗಿಸತಕ್ಕದ್ದು ಹಾಗೂ ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸತಕ್ಕದ್ದು ಎಂದು ಆದೇಶದಲ್ಲಿ ಹೇಳಲಾಗಿದೆ.
