ದೇಶದಾಧ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ ಸಂಬಂಧ ಸರ್ವೋಚ್ಚ ನ್ಯಾಯಾಲಯ ಇಂದು ವಿಚಾರಣೆ ನಡೆಸಿತು.
ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರ್ಪಡೆಗೊಳಿಸುವದು ಮತ್ತು ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿದ ಆಸ್ತಿಗಳನ್ನು ಡಿ-ನೋಟಿಫೈ ಮಾಡುವ ನಿಬಂಧನೆಗಳು ಸೇರಿದಂತೆ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಕೆಲವು ಪ್ರಮುಖ ನಿಬಂಧನೆಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿಗಳಾದ ಪಿವಿ ಸಂಜಯ್ ಕುಮಾರ್ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನೀಡಿದ ಭರವಸೆಯನ್ನು ದಾಖಲಿಸಿಕೊಂಡಿತು.
ಕಾಯ್ದೆಯ ನಿಬಂಧನೆಗಳಿಗೆ ತಡೆಯಾಜ್ಞೆ ನೀಡಬೇಕೆಂಬ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯವು ಸರ್ಕಾರಕ್ಕೆ ಏಳು ದಿನಗಳ ಕಾಲಾವಕಾಶ ನೀಡಿದೆ. ಅರ್ಜಿದಾರರು ಐದು ದಿನಗಳ ಒಳಗೆ ತಮ್ಮ ಪ್ರತಿವಾದವನ್ನು ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೇ ಮೇ 5 ರಂದು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ತ್ರಿಸದಸ್ಯ ಪೀಠ ಹೇಳಿದೆ.
