ರಾಜ್ಯದಲ್ಲಿ ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡವರ ಹಾಗೂ ಅವುಗಳನ್ನು ವಿತರಿಸಿದವರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಮಂಗಳವಾರ ಹೈಕೋರ್ಟ್ ಸೂಚನೆ ನೀಡಿದೆ.
ರಾಜ್ಯ ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ್ ರಾವ್ ಹಾಗೂ ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ನಡೆಸಿತು.
ರಾಜ್ಯದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಮುಂಬಡ್ತಿ ಪಡೆದಿರುವ ಹಾಗೂ ಸರ್ಕಾರಿ ನೌಕರಿ ಮತ್ತು ಸರ್ಕಾರಿ ಸೌಲಭ್ಯಗಳನ್ನು ಪಡೆದ ಪ್ರಕರಣಗಳು ಆಗಾಗ ಕೇಳಿ ಬರುತ್ತಿವೆ.
